ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಜೈಲರ್ ಹಾಗೂ ಮೂವರು ಸಿಬ್ಬಂದಿಗಳ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಮಂಗಳೂರು ಮೂಲದ ಕುಖ್ಯಾತ ರೌಡಿಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಕಾರವಾರ ಜೈಲಿನಲ್ಲಿಯೂ ತಮ್ಮ ಚಾಳಿ ಮುಂದುವರಿಸಲು ಯತ್ನಿಸಿದ ಆರೋಪಿಗಳಿಗೆ ಜೈಲರ್ ಕಲ್ಲಪ್ಪ ಗಸ್ತಿ ಅವರು ಅಡ್ಡಿಯಾಗಿದ್ದರು.
ಕಳೆದ ಕೆಲ ದಿನಗಳಿಂದ ಜೈಲಿನಲ್ಲಿ ಮಾದಕ ಪದಾರ್ಥಗಳ ನಿಯಂತ್ರಣಕ್ಕೆ ಜೈಲರ್ ಕಲ್ಲಪ್ಪ ಅವರು ಸಂಪೂರ್ಣ ನಿರ್ಬಂಧ ಹೇರಿದ್ದರು ಮತ್ತು ತಪಾಸಣೆಯನ್ನು ಬಿಗಿಗೊಳಿಸಿದ್ದರು. ಇದೇ ವಿಚಾರವಾಗಿ ಆರೋಪಿಗಳು ಜೈಲರ್ ಜೊತೆ ವಾಗ್ವಾದ ನಡೆಸಿದ್ದಾರೆ. ನಿಯಮ ಸಡಿಲಿಸಲು ಜೈಲರ್ ಒಪ್ಪದಿದ್ದಾಗ ರೊಚ್ಚಿಗೆದ್ದ ರೌಡಿಗಳು, ಜೈಲರ್ ಕಲ್ಲಪ್ಪ ಗಸ್ತಿ ಹಾಗೂ ಕರ್ತವ್ಯನಿರತ ಇತರ ಮೂವರು ಸಿಬ್ಬಂದಿಗಳ ಮೇಲೆ ಏಕಾಏಕಿ ಮುಗಿಬಿದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿಗಳ ಸಮವಸ್ತ್ರವನ್ನು ಹರಿದು ಹಾಕಿ ದರ್ಪ ತೋರಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಜೈಲರ್ ಹಾಗೂ ಮೂವರು ಸಿಬ್ಬಂದಿಗಳನ್ನು ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನ ಶಿಸ್ತು ಕಾಪಾಡಲು ಹೋದ ಅಧಿಕಾರಿಗಳ ಮೇಲೆಯೇ ನಡೆದ ಈ ಹಲ್ಲೆ ಪ್ರಕರಣವು ಕಾರಾಗೃಹದ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.