ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ–63ರ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ಹೆದ್ದಾರಿ ಪೇಂಟಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಆತಂಕಕ್ಕೆ ಕಾರಣವಾಯಿತು. ಪೇಂಟಿಂಗ್ಗೆ ಬಳಸುತ್ತಿದ್ದ ಬಾಯ್ಲರ್ ಅತಿಯಾಗಿ ಬಿಸಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು, ಲಾರಿಯಲ್ಲಿ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಲಾರಿ ಸಂಪೂರ್ಣವಾಗಿ ಹೊತ್ತಿ ಉರಿದು ಸುಟ್ಟು ಕರಕಲಾಗಿದೆ.
ಸಿಲಿಂಡರ್ ಸ್ಫೋಟದೊಂದಿಗೆ ಬೆಂಕಿಯ ಜ್ವಾಲೆಯ ಜೊತೆ ಕಪ್ಪು ಹೊಗೆ ಆಕಾಶಕ್ಕೆ ಚಿಮ್ಮಿದಂತೆ ಕಂಡುಬಂದಿದ್ದು, ಸ್ಥಳದಲ್ಲಿ ಕೆಲಕಾಲ ಗಾಬರಿಯ ವಾತಾವರಣ ನಿರ್ಮಾಣವಾಯಿತು. ಆದರೆ ಕಾರ್ಮಿಕರು ತಕ್ಷಣವೇ ಸ್ಥಳದಿಂದ ದೂರ ಸರಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಸುಗಮಗೊಳಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ತ್ವರಿತವಾಗಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರಾದರೂ, ಬೆಂಕಿಯ ತೀವ್ರತೆಗೆ ಲಾರಿಯನ್ನು ಉಳಿಸಲು ಸಾಧ್ಯವಾಗಲಿಲ್ಲ.
ಘಟನೆ ನಡೆದ ಸಂದರ್ಭದಲ್ಲಿ ಸ್ಥಳೀಯರು ಮತ್ತು ಕಾರ್ಮಿಕರಲ್ಲಿ ಆತಂಕ ಮೂಡಿದರೂ, ಬಳಿಕ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಒಟ್ಟಾರೆ ನಷ್ಟದ ಅಂದಾಜು ಕುರಿತು ಹೆಚ್ಚಿನ ವಿವರಗಳು ತನಿಖೆಯ ಬಳಿಕ ತಿಳಿದು ಬರಬೇಕಿದೆ.